ಪ್ರೈಡ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಿದ ‘ಕಾಂತಾರ’ ಕ್ವೀನ್…

ಸಾಧಕರಿಗೆ ಸನ್ಮಾನಿಸಿದ ಸಪ್ತಮಿ ಗೌಡ
ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಸನ್ಮಾನಿಸಿ, ಪ್ರಶಸ್ತಿ ಕೊಡುವ ಸಲುವ ಕಾರ್ಯವನ್ನು ʼಪ್ರೈಡ್ ಇಂಡಿಯಾ ಅವಾರ್ಡ್’ (India Pride Award) ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗೆ ಈ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ʼಕಾಂತಾರʼದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡುವುದರ ಜೊತೆಗೆ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಚಿತ್ರರಂಗ ಇತರ ಉದ್ಯಮ ರಂಗದ ದಿಗ್ಗಜರು, ಸಾಧಕರು ಭಾಗಿಯಾಗಿದ್ದರು.
ಹಲವು ಸವಾಲುಗಳನ್ನು ಎದುರಿಸಿ ಉದ್ಯಮ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನ ಮಾಡುವ ಕಾರ್ಯಕ್ರಮ ಅದಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಟಿ ಸಪ್ತಮಿ ಗೌಡ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಬೆಂಗಳೂರಿನಲ್ಲಿ ಇಂಡಿಯಾ ಪ್ರೈಡ್ ಅವಾರ್ಡ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ʼಇದೊಂದು ಅದ್ಭುತ ಕಾರ್ಯಕ್ರಮ. ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ಕೊಡುವ ಈ ಕಾರ್ಯಕ್ರಮ ಅರ್ಥ ಪೂರ್ಣವಾಗಿದೆ. ನಿಮ್ಮ ಪ್ರತಿ ಕೆಲಸದಲ್ಲಿ ಕುಟುಂಬದ ಬೆಂಬಲವಿದ್ದರೆ ಮಾತ್ರ ಎಲ್ಲವನ್ನೂ ಸಾಧಿಸಲು ಸಾಧ್ಯʼ ಎಂದರು.
ವಿನಯ್ ಕುಮಾರ್ ನಾರಾಯಣಸ್ವಾಮಿ ಅವರ ಪರಿಕಲ್ಪನೆ ಈ ʼಪ್ರೈಡ್ ಇಂಡಿಯಾ ಅವಾರ್ಡ್ʼ. ಉದ್ಯಮ ವಲಯದಲ್ಲಿ ತಮ್ಮ ಸಾಹಸಗಳ ಮೂಲಕ ಗೆದ್ದವರು ಹಲವು ವಿಭಾಗದಲ್ಲಿದ್ದಾರೆ. ಅಂಥಹವರನ್ನು ಗುರುತಿಸಿ, ಪ್ರೋತ್ಸಾಹಿಸಿ, ಭಾರತೀಯ ಉದ್ಯಮ ರಂಗ ಹೊಸಾ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರಣೆ ನೀಡುವುದು ಈ ಪ್ರಶಸ್ತಿಯ ಮೂಲ ಉದ್ದೇಶ. ಇದೀಗ ಬೆಂಗಳೂರಿನಲ್ಲಿ ನಡೆದಿರುವ ಈ ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಮುನ್ನೂರಕ್ಕೂ ಹೆಚ್ಚು ಮಂದಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಭಾರತದ ಆರ್ಥಿಕ ಪಥವನ್ನು ಪ್ರಜ್ವಲಿಸುವಂತೆ ಮಾಡುವಲ್ಲಿ ತಮ್ಮದೇ ಸೇವೆ ಸಲ್ಲಿಸುತ್ತಿರುವ ಅನೇಕರನ್ನು ಈ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತದೆ. ಆ ಆಯ್ಕೆ ಪ್ರಕ್ರಿಯೆ ಕೂಡಾ ಅತ್ಯಂತ ಅಚ್ಚುಕಟ್ಟಾಗಿ ನಡೆಯುತ್ತದೆ. ಯಾವುದೇ ಉದ್ಯಮದಲ್ಲಿನ ಹೊಸತನ, ಪ್ರಯೋಗಶೀಲತೆ, ಸಾಹಸ ಪ್ರವೃತ್ತಿಯನ್ನು ಪರಿಗಣಿಸುತ್ತಲೇ, ಗಹನವಾದ ಚರ್ಚೆ, ಹಲವಾರು ಮಾನದಂಡಗಳ ಆಧಾರದಲ್ಲಿ ಈ ಸಮಿತಿ ʼಪ್ರೈಡ್ ಇಂಡಿಯಾ ಅವಾರ್ಡ್ʼ ಗೆ ಅರ್ಹರನ್ನು ಆಯ್ಕೆ ಮಾಡಿದೆ.