Street Beat

ಕಿಚ್ಚನ ಕೈಯಲ್ಲಿ ‘ತಾಯವ್ವ’ನ ಹಾಡು…

‘ತಾಯವ್ವ’ ಚಿತ್ರದ ಆಡಿಯೋ ಬಿಡುಗಡೆ ಮಾಡಿದ ಕಿಚ್ಚ ಸುದೀಪ್‌ 

ಗ್ರಾಮೀಣ ಸೊಗಡಿನ ಜನಪದ ಗೀತೆಗಳಿಗೆ ನಟಿ ಗೀತಪ್ರಿಯ ಧ್ವನಿ

ತೆರೆಗೆ ಬರುತ್ತಿದ್ದಾಳೆ ಮತ್ತೊಬ್ಬಳು ‘ತಾಯವ್ವ’ 

ಸುಮಾರು ಮೂರು ದಶಕದ ಹಿಂದೆ ‘ತಾಯವ್ವ’ ಎಂಬ ಹೆಸರಿನ ಚಿತ್ರ ಕನ್ನಡದಲ್ಲಿ ತಯಾರಾಗಿದ್ದು, ಈ ಚಿತ್ರದ ಮೂಲಕ ನಟ ‘ಕಿಚ್ಚ’ ಸುದೀಪ್‌ ಮೊದಲ ಬಾರಿಗೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದ ವಿಷಯ ಅನೇಕರಿಗೆ ಗೊತ್ತಿರಬಹುದು. ಈಗ ಇದೇ ‘ತಾಯವ್ವ’ ಎಂಬ ಹೆಸರಿನಲ್ಲಿ ಮತ್ತೊಂದು ಹೊಸಬರ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ. ಅಂದಹಾಗೆ, ಅಂದು ಬಂದಿದ್ದ ‘ತಾಯವ್ವ’ ಚಿತ್ರಕ್ಕೂ, ಈಗ ಬರುತ್ತಿರುವ ‘ತಾಯವ್ವ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಚಿತ್ರದ ಕಥಾಹಂದರಕ್ಕೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ ಹೊಸಬರ ಚಿತ್ರತಂಡ ತಮ್ಮ ಚಿತ್ರಕ್ಕೂ ‘ತಾಯವ್ವ’ ಎಂದು ಹೆಸರಿಟ್ಟುಕೊಂಡಿದೆ. ಈಗಾಗಲೇ ಸದ್ದಿಲ್ಲದೆ ತನ್ನ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ‘ತಾಯವ್ವ’ ಚಿತ್ರದ ಹಾಡುಗಳನ್ನುಬಿಡುಗಡೆ ಮಾಡಿದೆ. ನಟ ಕಿಚ್ಚ ಸುದೀಪ್‌, ‘ತಾಯವ್ವ’ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸಬರ ‘ತಾಯವ್ವ’ ಚಿತ್ರಕ್ಕೆ ಸಾಥ್‌ ನೀಡಿದರು.

‘ತಾಯವ್ವ’ ಚಿತ್ರಕ್ಕೆ ಸುದೀಪ್‌ ಬೆಂಬಲ

ಇನ್ನು ಸುಮಾರು ಮೂರು ದಶಕಗಳ ಹಿಂದೆ ತೆರೆಗೆ ಬಂದಿದ್ದ ‘ತಾಯವ್ವ’ ಚಿತ್ರದಲ್ಲಿ ನಟ ಸುದೀಪ್‌ ಅವರೊಂದಿಗೆ ಹಿರಿಯ ನಟಿ ಉಮಾಶ್ರೀ ‘ತಾಯವ್ವ’ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ‘ತಾಯವ್ವ’ ಎಂಬ ಹೆಸರಿನ ಚಿತ್ರದಲ್ಲಿ ‘ತಾಯವ್ವ’ ನಾಗಿ ನವ ಪ್ರತಿಭೆ ಗೀತಪ್ರಿಯ ಕಾಣಿಸಿಕೊಳ್ಳುತ್ತಿದ್ದಾರೆ. ‘ತಾಯವ್ವ’ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿ ಮಾತನಾಡಿದ ನಟ ಕಿಚ್ಚ ಸುದೀಪ್‌, ‘ನಾನು ಆಗಷ್ಟೇ ಕಾಲೇಜು ಮುಗಿಸುತ್ತಿರುವ ಸಂದರ್ಭದಲ್ಲಿ ʼತಾಯವ್ವʼ ಸಿನೆಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತ್ತು. ಮೊದಲ ಬಾರಿಗೆ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದ ಈ ಸಿನೆಮಾ ನನಗೆ ಸಾಕಷ್ಟು ವಿಷಯಗಳನ್ನು ಹೇಳಿಕೊಟ್ಟಿತ್ತು. ನನ್ನ ವೃತ್ತಿ ಜೀವನದಲ್ಲಿ ಈ ಸಿನೆಮಾ ಇಂದಿಗೂ ಒಂದು ಸುಮಧುರ ನೆನಪಾಗಿ ಉಳಿದಿದೆ. ಈಗ ಅದೇ ‘ತಾಯವ್ವ’ ಹೆಸರಿನಲ್ಲಿ ಅಂಥದ್ದೇ ಮತ್ತೊಂದು ಸಿನೆಮಾ ತೆರೆಗೆ ಬರುತ್ತಿರುವುದು ಒಳ್ಳೆಯ ವಿಷಯ. ‘ತಾಯವ್ವ’ ಎಂಬ ಹೆಸರಿನಲ್ಲೇ ಒಂದು ಭಾವನಾತ್ಮಕ ಸೆಳೆತವಿದೆ. ಈ ಸಿನೆಮಾದಲ್ಲೂ ಅದೇ ಅಂಶಗಳಿರಬಹುದು ಎಂಬ ನಿರೀಕ್ಷೆಯಿದೆ. ಚಿತ್ರಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

‘ತಾಯವ್ವ’ನಿಗೆ ಧ್ವನಿಯಾದ ಗೀತಪ್ರಿಯ

ಈಗಾಗಲೇ ಸದ್ದಿಲ್ಲದೆ ‘ತಾಯವ್ವ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಈ ಚಿತ್ರದ ಮೂಲಕ ಮೊದಲ ಬಾರಿಗೆ ನವ ಪ್ರತಿಭೆ ಗೀತಪ್ರಿಯ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. ಇನ್ನು ‘ತಾಯವ್ವ’ ಚಿತ್ರದ ಹಾಡುಗಳಿಗೆ ಅನಂತ ಆರ್ಯನ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ತಾಯವ್ವ’ ಚಿತ್ರದ ಗೀತೆಗಳಿಗೆ ಸ್ವತಃ ಚಿತ್ರದ ಪ್ರಮುಖ ಭೂಮಿಕೆಯಲ್ಲಿ ‘ತಾಯವ್ವ’ನಾಗಿ ಅಭಿನಯಿಸಿರುವ, ಗೀತಪ್ರಿಯ ಅವರೇ ಧ್ವನಿಯಾಗಿದ್ದಾರೆ. ಅಪ್ಪಟ ಕನ್ನಡದ ಗ್ರಾಮೀಣ ಸೊಗಡಿನ ಜನಪದ ಗೀತೆಗಳ ಗುಚ್ಚವನ್ನು ‘ತಾಯವ್ವ’ ಚಿತ್ರದಲ್ಲಿ ಹೊಸರೂಪದಲ್ಲಿ ತೆರೆಮೇಲೆ ತರಲಾಗುತ್ತಿರುವುದು ಮತ್ತೊಂದು ವಿಶೇಷ. ‘ತಾಯವ್ವ’ ಚಿತ್ರದ ಆಡಿಯೋ ಬಿಡುಗಡೆ ವೇಳೆ ಮಾತನಾಡಿದ ಚಿತ್ರದ ನಾಯಕಿ ಮತ್ತು ಗಾಯಕಿ ಗೀತಪ್ರಿಯ, ‘ಇದೊಂದು ಅಪ್ಪಟ ಗ್ರಾಮೀಣ ಸೊಗಡಿನ ಸಿನೆಮಾ. ಹೆಣ್ಣುಮಕ್ಕಳನ್ನು ಉಳಿಸಿ, ಬೆಳೆಸಿ ಎಂಬ ಸಂದೇಶವನ್ನು ಇಟ್ಟುಕೊಂಡು ಈ ಸಿನೆಮಾ ಮಾಡಲಾಗಿದೆ. ಇದರಲ್ಲಿ ನಾನು ‘ತಾಯವ್ವ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನೆಮಾದಲ್ಲಿ ಒಂದು ಸಂದೇಶವಿದೆ. ಎಲ್ಲರಿಗೂ ತಲುಪುವಂಥ ವಿಷಯ ಇದರಲ್ಲಿದೆ. ಸುದೀಪ್‌ ಅವರ ಮೊದಲ ಸಿನೆಮಾದ ಹೆಸರನ್ನೇ ನಮ್ಮ ಸಿನೆಮಾಕ್ಕೆ ಇಟ್ಟುಕೊಂಡು ತೆರೆಗೆ ತರುತ್ತಿದ್ದೇವೆ. ನಮ್ಮ ಸಿನೆಮಾಕ್ಕೆ ಬೆಂಬಲವಾಗಿ ಸುದೀಪ್‌ ನಿಂತಿರುವುದು ನಮಗೆ ದೊಡ್ಡ ಬಲ ತಂದಂತಾಗಿದೆ. ಈಗಾಗಲೇ ಸಿನೆಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಆದಷ್ಟು ಬೇಗ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರಲಿದ್ದೇವೆ’ ಎಂದರು.

‘ಭಾ. ಮ. ಹರೀಶ್‌ ಆಡಿಯೋ’ ಕಂಪೆನಿಯ ಮೂಲಕ ‘ತಾಯವ್ವ’ ಗೀತೆ ರಿಲೀಸ್‌

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್‌, ಮೊದಲ ಬಾರಿಗೆ ‘ಭಾ. ಮ. ಹರೀಶ್‌ ಆಡಿಯೋ’ ಹೆಸರಿನಲ್ಲಿ ಹೊಸ ಆಡಿಯೋ ಕಂಪೆನಿಯನ್ನು ಪ್ರಾರಂಭಿಸಿದ್ದು, ಈ ಕಂಪೆನಿಯ ಅಡಿಯಲ್ಲಿ ‘ತಾಯವ್ವ’ ಸಿನೆಮಾದ ಆಡಿಯೋ ಬಿಡುಗಡೆಯಾಗಿದೆ. ‘ತಾಯವ್ವ’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪದ್ಮಾವತಿ ಚಂದ್ರಶೇಖರ್‌, ನಿರ್ಮಾಪಕರಾದ ಭಾ. ಮ. ಹರೀಶ್‌, ಕರ್ನಾಟಕ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣಪ್ಪ, ಐಪ್ಲೆಕ್ಸ್‌ ಮುಖ್ಯಸ್ಥ ಗಿರೀಶ್‌, ಶಿಕ್ಷಣ ತಜ್ಞ ನಾಗಪಾಲ್‌ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಸದ್ಯ ಹಾಡುಗಳ ಮೂಲಕ ಹೊರಬಂದಿರುವ ‘ತಾಯವ್ವ’ ಚಿತ್ರವನ್ನು ಶೀಘ್ರದಲ್ಲಿಯೇ ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

Related Posts

error: Content is protected !!